ಪ್ರಧಾನಿ ನರೇಂದ್ರ ಮೋದಿ  ಭೇಟಿ ವೇಳೆ ಬೆಂಗಳೂರಲ್ಲಿ ಭಾರೀ ಭದ್ರತಾ ಲೋಪದ ಶಂಕೆ ವ್ಯಕ್ತವಾಗಿದೆ. ಮೋದಿ ಅವರ ಕಾರ್ಯಕ್ರಮಕ್ಕೂ ಸುಮಾರು ಒಂದೂವರೆ ಗಂಟೆಗೂ ಮೊದಲು, ಕಗ್ಗಲೀಪುರದ ತಾತಗುಣಿ ಬಳಿಯ ಆರ್ಟ್ ಆಫ್ ಲಿವಿಂಗ್ ಆಶ್ರಮದ ಹೊರಗೆ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿವೆ. ನೈಸ್ ರಸ್ತೆ ಜಂಕ್ಷನ್‌ನಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿ, ರಸ್ತೆಯಿಂದ 20-25 ಅಡಿ ದೂರದಲ್ಲಿರುವ ಕಾಂಪೌಂಡ್ ಬಳಿ ಅನುಮಾನಾಸ್ಪದ ಪ್ಯಾಕೆಟ್ ಒಂದನ್ನು ಕರ್ತವ್ಯ ನಿರತ ಕಾನ್‌ಸ್ಟೆಬಲ್ ಗಮನಿಸಿದ್ದಾರೆ. ಪರಿಶೀಲಿಸಿದಾಗ ಅದರಲ್ಲಿ ಎರಡು ಜಿಲೆಟಿನ್ ಕಡ್ಡಿಗಳು ಇರುವುದು ಕಂಡುಬಂದಿದೆ. ಪೊಲೀಸರು ತಕ್ಷಣವೇ ಜಿಲೆಟಿನ್ ಕಡ್ಡಿಗಳನ್ನು ತೆರವುಗೊಳಿಸಿ ಯಾವುದೇ ಅನಾಹುತವಾಗದಂತೆ ಕ್ರಮ ಕೈಗೊಂಡಿದ್ದಾರೆ. ಈ ಘಟನೆ ಸಂಬಂಧ ಬೆಂಗಳೂರು ನಗರ ಪೊಲೀಸರು ಮತ್ತು ರಾಮನಗರ ಪೊಲೀಸರು ಜಂಟಿಯಾಗಿ ತನಿಖೆ ನಡೆಸುತ್ತಿದ್ದಾರೆ. ಕೇಂದ್ರ ವಲಯದ ಡಿಐಜಿ ಗಿರೀಶ್ ಅವರು ಟಿವಿ9 ಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಜಿಲೆಟಿನ್ ಕಡ್ಡಿಗಳು ಅಲ್ಲಿಗೆ ಹೇಗೆ ಬಂದವು, ಇಟ್ಟವರು ಯಾರು ಎಂಬ ಬಗ್ಗೆ ತೀವ್ರ ವಿಚಾರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *